
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು.
ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭದ್ರತಾ ಸಂಪುಟ ಸಮಿತಿಯು ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ಮತ್ತು ಅಟ್ಟಾರಿ ಗಡಿಯನ್ನು ಮುಚ್ಚಲು ನಿರ್ಧರಿಸಿದೆ. ಪಾಕಿಸ್ತಾನದ ರಾಜತಾಂತ್ರಿಕರನ್ನು ಹೊರಹಾಕಲು ಮತ್ತು ಪಾಕಿಸ್ತಾನಿ ಪ್ರಜೆಗಳಿಗೆ 48 ಗಂಟೆಗಳ ಒಳಗೆ ದೇಶ ಬಿಡಲು ಸೂಚಿಸಲಾಗಿದೆ.
ನಾಳೆ ಸರ್ವಪಕ್ಷ ಸಭೆ: ಪೆಹಲ್ಗಾಮ್ ದಾಳಿಯ ಬಗ್ಗೆ ನಾಳೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ.ಈ ಭಯೋತ್ಪಾದಕ ದಾಳಿಯ ಗಂಭೀರತೆಯನ್ನು ಗುರುತಿಸಿ, ಭದ್ರತಾ ಸಂಪುಟ ಸಮಿತಿ (CCS) ಈ ಕೆಳಗಿನ ಕ್ರಮಗಳನ್ನು ನಿರ್ಧರಿಸಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ತ್ಯಜಿಸುವವರೆಗೆ 1960 ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುತ್ತದೆ.
2. ಭಾರತದ ಹಾಗೂ ಪಾಕಿಸ್ತಾನದ ನಡುವೆ ಇರುವ ಅಟ್ಟಾರಿ ಸಮಗ್ರ ಚೆಕ್ಪೋಸ್ಟ್ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುತ್ತದೆ. ಮಾನ್ಯ ಒಪ್ಪಿಗೆಯೊಂದಿಗೆ ಇಲ್ಲಿಂದ ಗಡಿಯನ್ನು ದಾಟಿದವರು ಮೇ 1 ರ ಒಳಗಾಗಿ ಈ ಮಾರ್ಗದ ಮೂಲಕವೇ ವಾಪಾಸಗಬೇಕು ಎಂದು ತಿಳಿಸಲಾಗಿದೆ.
3. SAARC ವೀಸಾ ವಿನಾಯಿತಿ ಯೋಜನೆಯಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಪಾಕಿಸ್ತಾನಿ ಪ್ರಜೆಗಳಿಗೆ ಹಿಂದೆ ನೀಡಲಾದ ಯಾವುದೇ SPES ವೀಸಾಗಳನ್ನು ರದ್ದುಗೊಳಿಸಲಾಗುತ್ತದೆ. SPES ವೀಸಾದಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆಗೆ ಪ್ರಸ್ತುತ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶವಿದೆ.
4.ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಅವರು ಭಾರತವನ್ನು ಬಿಡಲು ಒಂದು ವಾರ ಕಾಲಾವಕಾಶ ನೀಡಲಾಗಿದೆ.
5. ಪಾಕಿಸ್ತಾದ ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನ ಸೇನಾಪಡೆ, ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳನ್ನು ಭಾರತ ವಾಪಾಸ್ ಕರೆಸಿಕೊಳ್ಳಲಿದೆ. ಆಯಾ ಹೈಕಮಿಷನ್ಗಳಲ್ಲಿನ ಈ ಹುದ್ದೆಗಳನ್ನು ರದ್ದುಗೊಳಿಸಲಾಗಿದೆ.
ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವಾರು ನಾಯಕರು ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.