ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ ಇದರ ವತಿಯಿಂದ ಬಾಳುಪೇಟೆಯಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಕ್ರಾಫರ್ಡ್ ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಪ್ರಕಾಶ್ ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಗ್ರಾಮೀಣ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ತಪಾಸಣಾ ಕಾರ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ನಡೆಸುತ್ತಿರುವುದು ಶ್ಲಾಘನೀಯ, ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ದೊರೆಯುವ ಆಹಾರ ಪದಾರ್ಥಗಳ ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು, ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿದರೆ ಪರಿಣಾಮಕಾರಿ ಚಿಕಿತ್ಸೆ ಪಡೆದು ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ.ಸರ್ಕಾರದ ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕುಟುಂಬಗಳಿಗೆ ಆರೋಗ್ಯ ವಿಮೆ ಸೌಲಭ್ಯ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಗ್ರಾಮೀಣ ಪ್ರದೇಶದ ಜನರು ತಮ್ಮ ಮನೆಯ ಸುತ್ತಮುತ್ತ ತರಕಾರಿ ಬೆಳೆಯುವುದು, ಪೌಷ್ಟಿಕ ಆಹಾರ ಸೇವಿಸುವುದು ಹಾಗೂ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.ಉಚಿತ ಆರೋಗ್ಯ ತಪಾಸಣೆ ಶಿಬಿರಗಳಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ, ರಕ್ತದೊತ್ತಡ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆದುಕೊಂಡು ನಿಶ್ಚಿಂತೆಯಿಂದ ಬದುಕಬೇಕು, ಆರೋಗ್ಯದ ಕುರಿತು ಯಾವುದೇ ಅನುಮಾನಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆಯಬೇಕು. ಆರೋಗ್ಯವೇ ಅಮೂಲ್ಯ ಸಂಪತ್ತು ಎಂಬ ಅರಿವು ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಕರೆ ನೀಡಿದರು.
ಶಿಬಿರದಲ್ಲಿ ಅಮ್ಮ ಐ ಕೇರ್ ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ಇಲಾಖೆ (NCD ಘಟಕ) ವತಿಯಿಂದ ಎಚ್ಬಿ (HB), ರಕ್ತದೊತ್ತಡ (BP), ರಕ್ತದಲ್ಲಿನ ಸಕ್ಕರೆ (Sugar) ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಜೇಶ್ ಎಂ, ಶಿಕ್ಷಕಿ ವೇದಾಂಬ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಮಂಜುಳ ಎಸ್.ಎಂ, ಮೇಲ್ವಿಚಾರಕಿ ಜ್ಯೋತಿ, ಸೇವಾ ಪ್ರತಿನಿಧಿ ನಳಿನಿ, ಆರೋಗ್ಯ ಇಲಾಖೆಯ ಸಿಬ್ಬಂದಿಯವರು, ಅಮ್ಮ ಐ ಕೇರ್ ಆಸ್ಪತ್ರೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.





