ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು: ಹರೀಶ್ ಪೂಂಜಾ
ಬೆಳ್ತಂಗಡಿ, ಆ. 6: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco Sensitive Area) ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಪ್ರಕಟಿಸಿರುವ ಕರಡು ಅಧಿಸೂಚನೆಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಬೇಕು ಎಂದು ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಸಂಬಂಧ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯಿಂದ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಭೂಮಿ, ಕೃಷಿ, ಮನೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸ್ಥಳೀಯರ ಅಭಿಪ್ರಾಯ ಮತ್ತು ಆಕ್ಷೇಪಣೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರವನ್ನು ರಾಜ್ಯ ಸರ್ಕಾರ ಕೇವಲ ಕೇಂದ್ರ ಸರ್ಕಾರದ ವಿಷಯವೆಂದು ಪರಿಗಣಿಸದೆ, ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢ ನಿಲುವು ತಾಳಬೇಕು. ರೈತರು, ಭೂಮಾಲೀಕರು ಹಾಗೂ ಗ್ರಾಮೀಣ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ಅಂಶಗಳಿದ್ದರೆ ಅವುಗಳನ್ನು ಸ್ಪಷ್ಟವಾಗಿ ವಿರೋಧಿಸಿ, ಜನರ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಬಲವಾದ ಆಕ್ಷೇಪಣೆ ಸಲ್ಲಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಸ್ಥಳೀಯರ ಹಕ್ಕುಗಳ ಪರವಾಗಿ ತಾವು ನಿರಂತರವಾಗಿ ಧ್ವನಿ ಎತ್ತುತ್ತಿದ್ದು, ಮುಂದೆಯೂ ಜನರ ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ಹರೀಶ್ ಪೂಂಜ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಪಕ್ಷಾತೀತವಾಗಿ ಜನರ ಪರವಾಗಿ ನಿಂತು, ಕರಡು ಅಧಿಸೂಚನೆಯಲ್ಲಿರುವ ಜನವಿರೋಧಿ ಅಂಶಗಳನ್ನು ಕೈಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದಿದ್ದಾರೆ.
ಕರಡು ಅಧಿಸೂಚನೆ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಜುಲೈ 27ರಿಂದ 60 ದಿನಗಳೊಳಗೆ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.
ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ:
ಕಾರ್ಯದರ್ಶಿಗಳು,ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ,ಇಂದಿರಾ ಪರಿಸರ ಭವನ, ಜೋರ್ಬಾಗ್, ನವದೆಹಲಿ – 110003. ಇ-ಮೇಲ್: esz-mef@nic.in
ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಭೂಮಿ, ಬದುಕು ಮತ್ತು ಹಕ್ಕುಗಳ ರಕ್ಷಣೆಗೆ ತಾವು ಸದಾ ಬದ್ಧರಾಗಿದ್ದು, ರಾಜ್ಯ ಸರ್ಕಾರವೂ ಜನರ ಪರವಾಗಿ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.





