ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಜೂ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಬೃಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಲ್ಯ ಸೇರಿದಂತೆ ಕರಾವಳಿ ಭಾಗದ ಶಾಸಕರು, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮುಖ ನಾಯಕರು ಉಪಸ್ಥಿತರಿದ್ದರು.





