ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಇನ್ನು ಕೆಲವರು ಮೊಬೈಲ್ ಫೋನ್ಗಳನ್ನು ಸ್ವಿಚ್ಡ್ ಆಫ್ ಮಾಡಿಕೊಂಡು ಕಚೇರಿಗೆ ಗೈರಾಗುವ ಮೂಲಕ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯಗಳ ಯೋಜನೆಗಳಿಗಾಗಿ ಜಮೀನು ಕಳೆದುಕೊಂಡ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾವಿರಾರು ಎಕರೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಂಜೂರು ಮಾಡಿದ್ದ ಪ್ರಕರಣದಲ್ಲಿ ಈ ಎಲ್ಲರಿಗೂ ಈಗ ಬಂಧನದ ಭೀತಿ ಎದುರಾಗಿದೆ.
ಪ್ರಮುಖರ ಬಂಧನ ಬೆನ್ನಲ್ಲೇ ಶುರುವಾಯ್ತು ನಡುಕ:
ಬೇಲೂರಿನ ಬಗರ್ಹುಕುಂ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ 16 ಜನರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಪಿರಿಯಾಪಟ್ಟಣ ಭೂಮಾಪನಾ ಇಲಾಖೆಯ ಎಂಟು ಮಂದಿಯನ್ನು ಕೂಡ ಬಂಧಿಸಲಾಗಿತ್ತು. ಈ ಸಾಲು ಸಾಲು ಬಂಧನಗಳ ಬೆಳವಣಿಗೆಯಿಂದ ತೀವ್ರ ಹೆದರಿರುವ ಹಾಸನ ಜಿಲ್ಲೆಯ ಕಂದಾಯ ಹಾಗೂ ಭೂಮಾಪನಾ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಫೋನ್ ಬಂದ್ ಮಾಡಿ ಕಚೇರಿಯಿಂದ ಕಾಲ್ತೆಗೆಯುತ್ತಿದ್ದಾರೆ.
2015 ರಿಂದ 2019 ರ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ತೀವ್ರಗೊಂಡ ತನಿಖೆ:
2015 ರಿಂದ 2019 ರ ಅವಧಿಯಲ್ಲಿ ಸಕಲೇಶಪುರ ತಾಲೂಕಿನ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಈ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಈಗಾಗಲೇ ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ. ಈ ವರದಿಯ ಆಧಾರದ ಮೇಲೆ ಪೊಲೀಸರು ಯಾವುದೇ ಕ್ಷಣದಲ್ಲಿಯೂ ಕಾರ್ಯಾಚರಣೆ ನಡೆಸಿ ಬಂಧಿಸಬಹುದು ಎಂಬ ಆತಂಕ ನೌಕರರನ್ನು ಕಾಡುತ್ತಿದೆ.
150ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾಕ್ಷಿ!
ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಹಿಂದೆ ಕೆಲಸ ಮಾಡಿದ್ದ ಮತ್ತು ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ತಹಶೀಲ್ದಾರರು, ಉಪ ತಹಶೀಲ್ದಾರರು ಸೇರಿದಂತೆ ವಿವಿಧ ಹಂತಗಳ 150ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಈ ಭೂ ಹಗರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದಾರೆ ಎಂಬುದು ತನಿಖಾ ವರದಿಯಲ್ಲಿ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರ ಮುಂದಿನ ಕ್ರಮದ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದ್ದು, ಈ ಬಹುಕೋಟಿ ಮೌಲ್ಯದ ಭೂ ಹಗರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬಂಧನಗಳು ನಡೆಯುವ ಸಾಧ್ಯತೆಯಿದೆ.






