ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರಗಳನ್ನು ಹೊಂದಿರುವ ಈ ಭಾಗದಲ್ಲಿ ಸಣ್ಣ ಗಾಳಿ ಅಥವಾ ಮಳೆಯಾದರೂ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ. ಕೆಲವೊಮ್ಮೆ ಗಂಟೆಗಟ್ಟಲೆ ಮಾತ್ರವಲ್ಲದೆ ದೀರ್ಘಕಾಲ ವಿದ್ಯುತ್ ಇಲ್ಲದೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ವಿದ್ಯುತ್ ವ್ಯತ್ಯಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ವ್ಯಾಪಾರ-ವಹಿವಾಟು ಹಾಗೂ ದೈನಂದಿನ ಬದುಕಿನ ಮೇಲೂ ಪರಿಣಾಮ ಬೀರುತ್ತಿದೆ. ನಿರಂತರ ವಿದ್ಯುತ್ ಕಡಿತದಿಂದ ಮನೆಗಳು, ಅಂಗಡಿಗಳು ಮತ್ತು ವಿವಿಧ ಸಂಸ್ಥೆಗಳಲ್ಲಿ ಬಳಸುವ ಇನ್ವರ್ಟರ್ಗಳ ಬ್ಯಾಟರಿಗಳು ಖಾಲಿಯಾಗುತ್ತಿದ್ದು, ಇದರಿಂದ ಭದ್ರತೆಗಾಗಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳೂ ಕಾರ್ಯನಿರ್ವಹಿಸದ ಪರಿಸ್ಥಿತಿ ಎದುರಾಗಿದೆ. ಇದರಿಂದ ರಾತ್ರಿ ವೇಳೆ ಕಳ್ಳತನ ಸೇರಿದಂತೆ ಅನಾಹುತಗಳ ಭೀತಿ ಹೆಚ್ಚಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ದೂರುಗಳಿಗೆ ಸ್ಪಂದನೆ ಇಲ್ಲ ಎಂಬ ಆರೋಪ!!!!
ವಿದ್ಯುತ್ ಸಮಸ್ಯೆ ಎದುರಾದ ಸಂದರ್ಭದಲ್ಲಿ ಸಂಬಂಧಪಟ್ಟ ಸಿಬ್ಬಂದಿಗೆ ಹಲವು ಬಾರಿ ದೂರು ನೀಡಿದರೂ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪವಾಗಿದೆ. ಸಮಸ್ಯೆ ಉಂಟಾದಾಗ ಸಾರ್ವಜನಿಕರ ದೂರವಾಣಿ ಕರೆಗಳಿಗೆ ಸ್ಪಂದಿಸುವುದು ಹಾಗೂ ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವುದು ಮೆಸ್ಕಾಂನ ಜವಾಬ್ದಾರಿಯಾಗಿದ್ದು, ಈ ಕುರಿತು ಹಿರಿಯ ಅಧಿಕಾರಿಗಳು ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸ್ಥಳೀಯ ಲೈನ್ಮ್ಯಾನ್ ಕಾರ್ಯವೈಖರಿ ಕುರಿತು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು, ದೂರುಗಳ ಸಂದರ್ಭದಲ್ಲಿ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪ ಮಾಡಿದ್ದಾರೆ. ಈ ಆರೋಪಗಳ ಬಗ್ಗೆ ಮೆಸ್ಕಾಂ ಅಧಿಕಾರಿಗಳು ವಾಸ್ತವಾಂಶ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.
ಹಿಂದಿನ ಸೇವೆಯನ್ನು ನೆನಪಿಸಿಕೊಳ್ಳುತ್ತಿರುವ ಗ್ರಾಮಸ್ಥರು:
ಇದೇ ಸಂದರ್ಭದಲ್ಲಿ ಸುಮಾರು ಎಂಟು ವರ್ಷಗಳ ಹಿಂದೆ ಈ ಭಾಗದಲ್ಲಿ ಸೇವೆ ಸಲ್ಲಿಸಿದ್ದ ಲೈನ್ಮ್ಯಾನ್ ಒಬ್ಬರನ್ನು ಹಾಗೂ ಅವರ ಕಾರ್ಯವೈಖರಿಯನ್ನು ಗ್ರಾಮಸ್ಥರು ನೆನಪಿಸಿಕೊಳ್ಳುತ್ತಿದ್ದಾರೆ. ಭಾರಿ ಮಳೆ ಮತ್ತು ಪ್ರವಾಹದಂತಹ ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ಹಗಲು-ರಾತ್ರಿ ಶ್ರಮಿಸುತ್ತಿದ್ದರು ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.
ಪ್ರಸ್ತುತ ಪರಿಸ್ಥಿತಿಯಲ್ಲಿ ಕೂಡ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮತ್ತು ಪ್ರತಿಕೂಲ ಹವಾಮಾನದಲ್ಲಿಯೂ ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸುವ ಸಿಬ್ಬಂದಿ ಅಗತ್ಯವಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಶಾಶ್ವತ ಪರಿಹಾರಕ್ಕೆ ಆಗ್ರಹ
ಮಿತ್ತಬಾಗಿಲು, ಮಲವಂತಿಗೆ ಹಾಗೂ ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವ ಮೂಲ ಕಾರಣವನ್ನು ಮೆಸ್ಕಾಂ ಅಧಿಕಾರಿಗಳು ಪರಿಶೀಲಿಸಬೇಕು. ವಿದ್ಯುತ್ ಮಾರ್ಗ, ಕಂಬಗಳು, ತಾಂತ್ರಿಕ ವ್ಯವಸ್ಥೆ ಹಾಗೂ ನಿರ್ವಹಣಾ ಕಾರ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅಲ್ಲದೆ, ಸಾರ್ವಜನಿಕರ ದೂರಿಗೆ ತ್ವರಿತವಾಗಿ ಸ್ಪಂದಿಸುವ ಸಿಬ್ಬಂದಿಯನ್ನು ಈ ಸೂಕ್ಷ್ಮ ಪ್ರದೇಶಕ್ಕೆ ನಿಯೋಜಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಬಗ್ಗೆ ಬಂದಿರುವ ಆರೋಪಗಳನ್ನೂ ಹಿರಿಯ ಅಧಿಕಾರಿಗಳು ಪರಿಶೀಲಿಸಿ, ತಪ್ಪು ಸಾಬೀತಾದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
“ವಿದ್ಯುತ್ ಸಮಸ್ಯೆ ಮುಂದುವರಿದರೆ ಗ್ರಾಮಸ್ಥರು ಒಗ್ಗಟ್ಟಾಗಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ಬರಬಹುದು. ಅದಕ್ಕೂ ಮುನ್ನ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಒದಗಿಸಬೇಕು” ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಈ ಗ್ರಾಮಗಳಿಗೆ ನಿರಂತರ ಹಾಗೂ ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಕಲ್ಪಿಸುವುದು ಅತ್ಯಗತ್ಯವಾಗಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.





