
ಚಿಕ್ಕಮಗಳೂರು : ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕೆ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಎಂಬವರಿಗೆ ಸೇರಿದ ಕಾಫಿ ಎಸ್ಟೇಟ್ನಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕರು ರಮೇಶ್ ಅವರ ತೋಟದಲ್ಲಿ ಕಾಫಿ ಕೊಯ್ಲು ಮಾಡುವುದರಲ್ಲಿ ನಿರತರಾಗಿದ್ದರು. ಜ.8ರಂದು ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ವಿವಾಹಿತ ಮಹಿಳಾ ಕಾರ್ಮಿಕರಾದ ಬಸೂರಿ ಬೀಬಿ (42 ವರ್ಷ) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಹಿಳೆಯ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಕಾಡುಕೋಣ ಕೊಂಬಿನಿಂದ ತಿವಿದಿದ್ದು, ತೀವ್ರವಾಗಿ ಗಾಯಗೊಂಡು ಮಹಿಳೆ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.