ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಸಕಲೇಶಪುರ, ಆಲೂರು ಹಾಗೂ ಬೇಲೂರು ವಲಯಗಳ ಸಿ.ಎಸ್.ಸಿ ಕೇಂದ್ರಗಳಲ್ಲಿ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮಟ್ಟದ ಒಲಿಂಪಿಯಾಡ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು.
ಪ್ರಥಮ ಬಾರಿಗೆ ನಡೆದ ಈ ಪರೀಕ್ಷೆಯಲ್ಲಿ ಒಟ್ಟು 305 ವಿದ್ಯಾರ್ಥಿಗಳು ಭಾಗವಹಿಸಿದ್ದು, ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಸಿ.ಎಸ್.ಸಿ ಪ್ರಾದೇಶಿಕ ನಿರ್ದೇಶಕರಾದ ಜಯಂತ್ ಪೂಜಾರಿ ಹಾಗೂ ಹಾಸನ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಉದ್ಘಾಟಿಸಿದರು.
ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಒಲಿಂಪಿಯಾಡ್ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಿ.ಎಸ್.ಸಿ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ ಅವರು, “ಒಲಿಂಪಿಯಾಡ್ ಪರೀಕ್ಷೆಯು 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವ ವಿಶೇಷ ಸ್ಪರ್ಧಾತ್ಮಕ ಪರೀಕ್ಷೆಯಾಗಿದೆ. ಇಂಗ್ಲಿಷ್, ಸಾಮಾನ್ಯ ಜ್ಞಾನ, ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡುವ ಈ ಪರೀಕ್ಷೆ, ಶಾಲಾ ಪಠ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ ವಿದ್ಯಾರ್ಥಿಗಳ ಆಳವಾದ ಜ್ಞಾನವನ್ನು ಅಳೆಯಲು ಸಹಕಾರಿಯಾಗುತ್ತದೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಆತ್ಮವಿಶ್ವಾಸ ಮತ್ತು ಸಿದ್ಧತೆಯನ್ನು ಹೆಚ್ಚಿಸುವುದರೊಂದಿಗೆ ವಿದ್ಯಾರ್ಥಿಗಳ ಆಸಕ್ತಿ ಹಾಗೂ ಪ್ರತಿಭೆಗಳನ್ನು ಗುರುತಿಸಲು ಸಹ ನೆರವಾಗುತ್ತದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಸಿ.ಎಸ್.ಸಿ ಯೋಜನಾಧಿಕಾರಿ ಸೋಮಶೇಖರ್, ಜಿಲ್ಲಾ ಎಂ.ಐ.ಎಸ್. ಯೋಜನಾಧಿಕಾರಿ ರಾಮಣ್ಣ, ಕ್ಷೇತ್ರ ಯೋಜನಾಧಿಕಾರಿ ರತ್ನಾಕರ್, ತಾಲೂಕು ನೋಡಲ್ಗಳಾದ ಪ್ರದೀಪ್, ಓಂಕಾರ್, ಜಯಪ್ರಸಾದ್ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.





