ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ವತಿಯಿಂದ ಹೆಗ್ಗದ್ದೆ ಹಾಗೂ ಕಸಬಾ, ಹೆಬಸ್ಸಾಲೆ ವಲಯದ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆರ್ಥಿಕ ಸಾಮಾಜಿಕ, ಹಾಗೂ ಮಹಿಳಾ ಸಬಲೀಕರಣದೊಂದಿಗೆ ಸಂಘಟಿತವಾಗಿ ಅಭಿವೃದ್ಧಿ ಪಡಿಸುವಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರದ ಸಾಧನೆ ಮಾಡಿದೆ ಇದರಲ್ಲಿ ಒಕ್ಕೂಟಗಳನ್ನು ರಚಿಸಿಕೊಂಡಿದ್ದು ಒಕ್ಕೂಟದ ಪದಾಧಿಕಾರಿಗಳು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸಬೇಕು, ಪದಾಧಿಕಾರಿಗಳು ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸುವುದು, ಸಂಘಟನೆಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಹಾಗೂ ಸದಸ್ಯರಲ್ಲಿ ಒಗ್ಗಟ್ಟು ಮತ್ತು ಸಹಕಾರದ ಮನೋಭಾವ ಬೆಳೆಸುವುದು ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನೆಲೆ, ಗ್ರಾಮಾಭಿವೃದ್ಧಿ ಯೋಜನೆಯ ಪರಿಕಲ್ಪನೆ ಹಾಗೂ ಯೋಜನೆಯ ಮೂಲ ತತ್ವಗಳ ಕುರಿತು ವಿವರಿಸಿದರು. ಗ್ರಾಮೀಣ ಜನರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಯೋಜನೆಯ ಪಾತ್ರ, ಸ್ವಾವಲಂಬನೆ ಹಾಗೂ ಸಂಘಟಿತ ಪ್ರಯತ್ನಗಳ ಮಹತ್ವವನ್ನು ತಿಳಿಸಿದರು.
ಒಕ್ಕೂಟದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಮೂಲಕ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ತರಬೇತಿಯಲ್ಲಿ ಸಮುದಾಯ ಕಾರ್ಯಕ್ರಮಗಳ ಉದ್ದೇಶ, ಅನುಷ್ಠಾನ ವಿಧಾನ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಂಘಟನೆಯ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ರಾಜೇಶ್ ಎಂ, ಜಿಲ್ಲಾ ವಿಚಕ್ಷಣಾಧಿಕಾರಿ ಅರುಣ್, ವಿಮಾ ಸಮನ್ವಯಾಧಿಕಾರಿ ಶಿವಕುಮಾರ್, ಹಾಗೂ ಯೋಜನೆಯ ಸಿಬ್ಬಂದಿಗಳಾದ ಚಿರಂತ್, ಮೋಹಿನಿ, ಪರಮೇಶ್ ,ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.





