![](https://kalanirnayanews.com/wp-content/uploads/2020/06/1591452801622.jpg)
ಬೆಂಗಳೂರು: ಕೊರೊನಾತಂಕದ ನಡುವೆಯೇ ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ದೋಷರಹಿತವಾಗಿ ಪರೀಕ್ಷೆ ನಡೆಸಲು ಜುಲೈ 3 ರವರೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿಗೆ ತಂದು ನಗರ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳ ಸೈಬರ್ ಕೇಂದ್ರಗಳು ಹಾಗೂ ಜೆರಾಕ್ಸ್ ಅಂಗಡಿಗಳು ಬಂದ್ ಆಗಲಿವೆ. ಐದಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರುವಂತಿಲ್ಲ. ಕೇಂದ್ರದ ಸುತ್ತಮುತ್ತಲು ಪ್ರತಿಭಟನೆ, ಮೆರವಣಿಗೆ ಸಭೆ ಮಾಡುವಂತಿಲ್ಲ. ನಿಯಮ ಉಲ್ಲಂಘನೆ ಕಂಡುಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಕಮೀಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ.ಹಲವು ಅಡೆತಡೆಗಳ ಮಧ್ಯೆ ಪರೀಕ್ಷೆ ನಡೆಯಲಿದ್ದು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 81,265 ಅಧಿಕಾರಿಗಳು, ಸಿಬ್ಬಂದಿ ಜತೆಗೆ ಗೃಹ ಇಲಾಖೆ, ಪೊಲೀಸ್, ಇತರೆ ಸಿಬ್ಬಂದಿ ಸೇರಿ 1.5 ಲಕ್ಷ ಜನರು ಕಾರ್ಯನಿರ್ವಹಿಸಲಿದ್ದಾರೆ. ಎಲ್ಲಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಬೆಳಗ್ಗೆ 7ರಿಂದಲೇ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ಇರಲಿದ್ದು ಸೂಕ್ತ ಮುಂಜಾಗ್ರತ ಕ್ರಮಗಳನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ.